Recommendations: ಖಾಲಿ ಇರುವ ಶೇ. 36.5ರಷ್ಟು ಶಿಕ್ಷಕರ ಹುದ್ದೆ ಭರ್ತಿಗೆ ಶಿಫಾರಸು
Recommendations: ಖಾಲಿ ಇರುವ ಶೇ. 36.5ರಷ್ಟು ಶಿಕ್ಷಕರ ಹುದ್ದೆ ಭರ್ತಿಗೆ ಶಿಫಾರಸು: ಕಲ್ಯಾಣ ಕರ್ನಾಟಕ ಜಿಲ್ಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ ಕುರಿತಾಗಿ ತಜ್ಞರ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವರದಿ ಸಲ್ಲಿಸಿದ್ದು, ಖಾಲಿ ಇರುವ ಪ್ರಾಥಮಿಕ ಶಾಲಾ ಶಿಕ್ಷಕರ 17,274 ಹುದ್ದೆಗಳು (ಒಟ್ಟು ಹುದ್ದೆಗಳ ಶೇ. 38.2) ಮತ್ತು ಪ್ರೌಢಶಾಲಾ ಶಿಕ್ಷಕರ 4,107 ಹುದ್ದೆಗಳ (ಶೇ. 34.8) ಭರ್ತಿಗೆ ಶಿಫಾರಸು ಮಾಡಿದೆ.
ನಗರದ ಸುವರ್ಣಸೌಧದಲ್ಲಿ ಸಮಿತಿ ವರದಿ ಸಲ್ಲಿಸಿತು. ಸಮಿತಿಯ ಶಿಫಾರಸುಗಳನ್ನು ಪರಿಶೀಲಿಸಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.”
ತಜ್ಞರ ಸಮಿತಿ ವರದಿ:
ಕಲ್ಯಾಣ ಕರ್ನಾಟಕ ಪ್ರದೇಶವು ತನ್ನ ವ್ಯಾಪ್ತಿಯಲ್ಲಿರುವ ಒಟ್ಟು ಶಾಲೆಗಳಲ್ಲಿ, ಶೇ. 57.35ರಷ್ಟು ಸರ್ಕಾರಿ ಶಾಲೆಗಳು ಪಾಲು ಹೊಂದಿದ್ದು, ನಂತರದ ಸ್ಥಾನದಲ್ಲಿ ಶೇ. 33.42ರಷ್ಟು ಖಾಸಗಿ ಶಾಲೆಗಳಿವೆ. ಮುಂದಿನ ತರಗತಿಗಳಿಗೆ ತೇರ್ಗಡೆ ಹೊಂದುವ ವಿದ್ಯಾರ್ಥಿಗಳ ಪ್ರಮಾಣ 7ನೇ ತರಗತಿ ಬಳಿಕ ನಿರಂತರವಾಗಿ ಕಡಿಮೆಯಾಗುತ್ತಿದೆ. ಶೇ. 12ರಷ್ಟು ವಿದ್ಯಾರ್ಥಿಗಳಿಗೆ 9ರಿಂದ 10ನೇ ತರಗತಿ ತೇರ್ಗಡೆ ಆಗಲು ಸಾಧ್ಯವಾಗುತ್ತಿಲ್ಲ.
▪️ಈ ಪ್ರದೇಶದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ 17,274 ಹುದ್ದೆಗಳು (ಒಟ್ಟು ಹುದ್ದೆಗಳ ಶೇ. 38.2) ಮತ್ತು ಪ್ರೌಢಶಾಲಾ ಶಿಕ್ಷಕರ 4,107 ಹುದ್ದೆಗಳು (ಶೇ. 34.8) ಖಾಲಿ ಇದ್ದುದರಿಂದ ಪ್ರಾಥಮಿಕ ಹಂತದಿಂದಲ್ಲೇ ಶಿಕ್ಷಣದ ಗುಣಮಟ್ಟಕ್ಕೆ ಹಾನಿಯಾಗುತ್ತಿದೆ.
▪️ಈ ಪ್ರದೇಶದ ಮೊದಲ ಹಂತದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಒಟ್ಟಾರೆ ಉತ್ತೀರ್ಣ ಪ್ರಮಾಣ ಶೇ. 53.40 ಆಗಿದ್ದು, ರಾಜ್ಯದ ಸರಾಸರಿ ಶೇ. 66.14ರಷ್ಟಾಗಿದೆ. ಇದು ಕಲಬುರಗಿ ಜಿಲ್ಲೆಯಲ್ಲಿ ಅತಿ ಕಡಿಮೆ ಅಂದರೆ, ಶೇ. 42.43ರಷ್ಟಾಗಿದೆ.
▪️ರಾಜ್ಯದಲ್ಲಿ 3 ಪರೀಕ್ಷೆಗಳ ಸರಾಸರಿ ಫಲಿತಾಂಶ ಶೇ. 79.97 ರಷ್ಟಾಗಿದ್ದು, ವಿಜಯನಗರ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳು ರಾಜ್ಯ ಸರಾಸರಿಗಿಂತ ಕಡಿಮೆ ಫಲಿತಾಂಶ ದಾಖಲಿಸಿವೆ.
✅ ಕಲ್ಯಾಣ ಕರ್ನಾಟಕ ಜಿಲ್ಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಣಾ ತಜ್ಞರ ಸಮಿತಿ ವರದಿ ಸಲ್ಲಿಕೆ
✅ 17,274 ಪ್ರಾಥಮಿಕ ಶಾಲಾ ಶಿಕ್ಷಕ, 4,107 ಪ್ರೌಢಶಾಲಾ ಶಿಕ್ಷಕರ ಹುದ್ದೆ ಖಾಲಿ
ಸಮಿತಿ ರಚನೆ :
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸಮಗ್ರ ಮತ್ತು ಗುಣಮಟ್ಟದ ಶಿಕ್ಷಣ ಅಭಿವೃದ್ಧಿಗೆ ತಜ್ಞರ ಸಲಹೆ ಪಡೆಯುವ ಉದ್ದೇಶದಿಂದ, ಸರ್ಕಾರ ಫೆಬ್ರವರಿ 2025ರಲ್ಲಿ ಶಿಕ್ಷಣ ತಜ್ಞರಾದ ಡಾ. ಛಾಯಾ ದೇಗಾಂವಕರ ಅಧ್ಯಕ್ಷತೆಯಲ್ಲಿ ಡಾ. ಅಬ್ದುಲ್ ಖದಿರ್, ಮಲ್ಲಿಕಾರ್ಜುನ ಎಂ. ಎಸ್., ಫಾ. ಫ್ರಾನ್ಸಿಸ್ ಬಾಷ್ಯಂ, ಡಾ. ರುದ್ರೇಶ್ ಎಸ್., ಎನ್. ಬಿ. ಪಾಟೀಲ್, ಯಶವಂತ್ ಹರಸೂರ್ ಮತ್ತು ಡಾ. ನಾಗಬಾಯಿ ಬಿ. ಬುಳ್ಳಾ ಅವರನ್ನು ಒಳಗೊಂಡು ಸಮಿತಿ ರಚಿಸಿತ್ತು.
ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಸುಮಾರು 100 ಸರ್ಕಾರಿ ಶಾಲೆಗಳ ಕ್ಷೇತ್ರ ಭೇಟಿಗಳ ಮೂಲಕ ಮಾಹಿತಿ ಪಡೆದು ಸಮಿತಿ ಸಮಗ್ರ ಅಧ್ಯಯನ ವರದಿ ಸಿದ್ಧಪಡಿಸಿದೆ.
ಕಳಪೆ ಫಲಿತಾಂಶಕ್ಕೆ ಕಾರಣಗಳು:
ವಿಷಯ ಶಿಕ್ಷಕರನ್ನೂ ಒಳಗೊಂಡಂತೆ ಶಿಕ್ಷಕರ ಕೊರತೆ ಇರುವುದು, ಬೋಧನಾ ವಿಧಾನಗಳಲ್ಲಿ ಕಡಿಮೆ ಮಟ್ಟದ ಸಾಮರ್ಥ್ಯ ವೃದ್ಧಿ, ಸೂಕ್ತ ತರಬೇತಿಯಿಲ್ಲದ ಅತಿಥಿ ಶಿಕ್ಷಕರೇ ಹೆಚ್ಚಾಗಿರುವುದು, ಪರಿಣತ ಅಧ್ಯಾಪಕರ ಕೊರತೆಯಿಂದಾಗಿ ಡಯಟ್ ಸಂಸ್ಥೆಗಳ ಪರಿಣಾಮಕಾರಿ ಕಾರ್ಯನಿರ್ವಹಣೆಯ ಕೊರತೆ, ಬಿಆರ್ಸಿ ಮತ್ತು ಸಿಆರ್ಸಿಗಳಿಂದ ಸಮರ್ಪಕ ಗುಣಮಟ್ಟದ ಶೈಕ್ಷಣಿಕ ಮಾರ್ಗದರ್ಶನದ ಕೊರತೆ ಹಾಗೂ ಶಾಲಾ ಕಾರ್ಯನಿರ್ವಹಣೆಯ ಮೇಲ್ವಿಚಾರಣೆ ಮತ್ತು ಪರಿಶೀಲನೆಯಲ್ಲಿ ದುರ್ಬಲತೆಗಳು ಕಳಪೆ ಫಲಿತಾಂಶಕ್ಕೆ ಕಾರಣಗಳಾಗಿವೆ.

ಸಮಿತಿಯ ಪ್ರಮುಖ ಶಿಫಾರಸುಗಳು:
▪️ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ತರಬೇತಿ ಪಡೆದ ಶಿಕ್ಷಕರ ಲಭ್ಯತೆ ಸಾಬೀತುಪಡಿಸಲು ವರ್ಗಾವಣೆ ನೀತಿಯ ಪರಿಶೀಲನೆ ನಡೆಸುವ ಅಗತ್ಯವಿದೆ.
▪️ಮೂಲಭೂತ ಸಾಕ್ಷರತೆ ಮತ್ತು ಗಣಿತಜ್ಞತೆ ಕಾರ್ಯಕ್ರಮದ ಪರಿಣಾಮಕಾರಿ ಮತ್ತು ಫಲಿತಾಂಶಾಧಾರಿತ ಅನುಷ್ಠಾನಕ್ಕೆ ತಂತ್ರ ರೂಪಿಸುವುದು.
▪️ಮಾಧ್ಯಮಿಕ ಶಿಕ್ಷಣಕ್ಕೆ ಪ್ರವೇಶ ಸುಧಾರಿಸಲು ಸಾಧ್ಯವಿರುವ ಮತ್ತು ಕಾರ್ಯನಿರ್ವಹಣೆಯಲ್ಲಿರುವ ಕಡೆಗಳಲ್ಲಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳಾಗಿ ಮೇಲ್ದರ್ಜೆಗೇರಿಸಬೇಕು.
▪️ಕೆಳ ಹಂತದಲ್ಲಿ ಕಲಿಕಾ ಪ್ರಕ್ರಿಯೆಯನ್ನು ಸುಧಾರಿಸಲು ಕ್ರಮ ಕೈಗೊಳ್ಳುವುದು.
▪️1-3ನೇ ತರಗತಿಗಳಲ್ಲಿ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿ, ಮುಂದಿನ ತರಗತಿಗಳಲ್ಲಿಯೂ ಅವುಗಳನ್ನು ನಿರಂತರವಾಗಿರಿಸುವುದು.
▪️ಮಧ್ಯವರ್ತಿ ಕಲಿಕಾ ವಿಧಾನಗಳು 4ನೇ ತರಗತಿಯಿಂದ ಆರಂಭವಾಗಬೇಕು.
▪️ನಿಧಾನ ಕಲಿಯುವ ವಿದ್ಯಾರ್ಥಿಗಳಿಗೆ ವೈಯಕ್ತಿಕ ಬೆಂಬಲ ಒದಗಿಸಬೇಕು.
▪️ಶಾಲೆಗಳು ಮತ್ತು ಶಿಕ್ಷಕರಿಗೆ ಕಲಿಕಾ ಫಲಿತಾಂಶ ಗುರಿಗಳೊಂದಿಗೆ ಸ್ವಾಯತ್ತತೆ ಮತ್ತು ಜವಾಬ್ದಾರಿ ನೀಡುವುದು.
▪️ಆರಂಭಿಕ ಬಾಲ್ಯ ಶಿಕ್ಷಣಕ್ಕೆ ಬೇಡಿಕೆ ಇದ್ದು, ಇಂಗ್ಲಿಷ್ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡಿದ ಅಥವಾ ಸಮರ್ಪಕ ಇಂಗ್ಲಿಷ್ ಜ್ಞಾನ ಹೊಂದಿದ ಶಿಕ್ಷಕರನ್ನು ಈ ತರಗತಿಗಳಿಗೆ ವರ್ಗಾಯಿಸಬೇಕು.
▪️ಆರಂಭಿಕ ಬಾಲ್ಯ ಶಿಕ್ಷಣವನ್ನು ಐಸಿಡಿಎಸ್ ಜೊತೆ ಸಂಯೋಜಿಸಿ ಜಾರಿ ಮಾಡಬೇಕು.
▪️ನಲಿ-ಕಲಿ ಕಾರ್ಯಕ್ರಮದಲ್ಲಿ ಆನೇಕ ಶೈಕ್ಷಣಿಕ, ಮೂಲಸೌಕರ್ಯ ಮತ್ತು ಸಂಪನ್ಮೂಲಗಳಲ್ಲಿ ಕೊರತೆಗಳಿದ್ದು, ಇದನ್ನು ಸುಧಾರಿಸಬೇಕು.
▪️ಕರ್ನಾಟಕ ಪಬ್ಲಿಕ್ ಶಾಲೆಗಳು (ಕೆಪಿಎಸ್) ಈ ಪ್ರದೇಶದಲ್ಲಿ ಹೆಚ್ಚಿನ ಉಪಯೋಗ ಮತ್ತು ಸಾಮರ್ಥ್ಯ ಹೊಂದಿದ್ದು, ಇದು ಮಕ್ಕಳು ಶಾಲೆಯಿಂದ ಹೊರಗುಳಿಯುವುದನ್ನು ಕಡಿಮೆ ಮಾಡುತ್ತದೆ. ಮುಂದಿನ ಐದು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 350 ಕೆಪಿಎಸ್ ಸ್ಥಾಪಿಸಬೇಕು. ಇದರಲ್ಲಿ 200 ಶಾಲೆಗಳನ್ನು ಮಂಡಳಿಯಡಿಯಲ್ಲಿ ಸ್ಥಾಪಿಸಬೇಕು.
▪️ವಿಜಯನಗರ ಜಿಲ್ಲೆಯಲ್ಲಿ ಡೈಟ್ ಸ್ಥಾಪಿಸಬೇಕು. ಹೆಚ್ಚಿನ ದಾಖಲಾತಿಯಿರುವ 5 ಹೊಸ ತಾಲ್ಲೂಕುಗಳಲ್ಲಿ 14 ಬಿಇಒ ಕಚೇರಿಗಳನ್ನು ಸ್ಥಾಪಿಸಬೇಕು.
▪️ಶಾಲೆ ಬಿಡುವುದು ಮತ್ತು ಗೈರುಹಾಜರಿ ಕಡಿಮೆ ಮಾಡಲು ಹಾಗೂ ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಹಾಗು ಸಿದ್ಧತೆ ತಡೆಯಲು ಸಮುದಾಯದ ಭಾಗವಹಿಸುವಿಕೆ ಅತ್ಯಗತ್ಯ.
▪️ಯೋಜನೆಗಳ ಪರಿಣಾಮಗಳ ಮೌಲ್ಯಮಾಪನ, ಶಾಲಾ ಕಾರ್ಯಕ್ಷಮತೆ ಮತ್ತು ಗುಣಮಟ್ಟದ ಶಿಕ್ಷಣ ಗುರಿಗಳನ್ನು ಆಧರಿಸಿ ದೀರ್ಘಕಾಲೀನ ಯೋಜನೆ ಸಿದ್ಧ ಪಡಿಸಬೇಕು. ಎಲ್ಲ ಕಾರ್ಯಕ್ರಮಗಳ ಅನುಷ್ಠಾನದ ಗುಣಮಟ್ಟ ಪರಿಶೀಲನೆಯನ್ನು ಎರಡು ವರ್ಷಕ್ಕೊಮ್ಮೆ ನಡೆಸಬೇಕು.
▪️ಈ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಲಿಕಾ ಖಾತರಿ ಕಾರ್ಯಕ್ರಮವನ್ನು ಕೆಕೆಆರ್ಡಿಬಿ ವತಿಯಿಂದ ಜಾರಿಗೆ ತರಬೇಕು.
▪️ಹಾಜರಾತಿ ಮತ್ತು ಕಲಿಕಾ ಫಲಿತಾಂಶ ಗುರಿಗಳನ್ನು ಸಾಧಿಸಿದ ಶಾಲೆಗಳಿಗೆ ಪ್ರಶಸ್ತಿ ಮತ್ತು ಗೌರವ ನೀಡುವ ಮೂಲಕ ಉತ್ತಮ ಸಾಧನೆ ಮಾಡುವ ಶಾಲೆಗಳು, ಶಿಕ್ಷಕರು, ಮುಖ್ಯಶಿಕ್ಷಕರು ಮತ್ತು ಕಾರ್ಯನಿರ್ವಹಕರನ್ನು ಉತ್ತೇಜಿಸುವ ಕಾರ್ಯಕ್ರಮ ಇದಾಗಿದೆ.